ಶಿರಸಿ: ಬೇಲೆಕೆರೆ ಅದಿರು ಕಳ್ಳತನ ಹಾಗೂ ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಕಾರವಾರ ಶಾಸಕ ಸತೀಶ್ ಸೈಲ್ ಜೈಲು ಸೇರಿದ್ದಾರೆ. ಅದಾಗಿಯೂ `ಶಿರಸಿಯಲ್ಲಿ ನ 5ರಂದು ನಡೆಯಲಿರುವ ಚೆಸ್ ಪಂದ್ಯಾವಳಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಸತೀಶ್ ಸೈಲ್ ಭಾಗವಹಿಸಲಿದ್ದಾರೆ’ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದೆ. ಇದು ಪ್ರಕಟಣೆ ಹೊರಡಿಸಿದ ಅಧಿಕಾರಿಗಳ ತಪ್ಪಲ್ಲ. ಶಿಷ್ಟಾಚಾರ ಪಾಲನೆ ಎಂಬ ವ್ಯವಸ್ಥೆಯ ತಪ್ಪು..!
ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಹಾಗೂ ಮಾರಿಕಾಂಬಾ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ಶಿರಸಿಯ ಡಾ ಬಿ ಆರ್ ಅಂಬೇಡ್ಕರ್ ಭವನದಲ್ಲಿ ರಾಜ್ಯಮಟ್ಟದ ಚದುರಂಗ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಪ.ಪೂ ಶಿಕ್ಷಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ನ 5ರಂದು ಬೆಳಗ್ಗೆ 9.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ಎಸ್ ವೈದ್ಯ, ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿರೋಧ ಪಕ್ಷದ ನಾಯಕ ಆರ್ ಅಶೋಕ, ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್ ವಿ ದೇಶಪಾಂಡೆ, ಕರ್ನಾಟಕ ರಾಜ್ಯ ಮಾರ್ಕೆಟಿಂಗ್ ಕನ್ಸಲ್ಟೆಂಟ್ ಅಂಡ್ ಏಜೆನ್ಸಿಸ್ ಅಧ್ಯಕ್ಷ ಸತೀಶ್ ಕೆ ಸೈಲ್, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಇದರೊಂದಿಗೆ ಶಾಸಕರಾದ ಶಿವರಾಮ ಹೆಬ್ಬಾರ್, ದಿನಕರ ಶೆಟ್ಟಿ, ಭೀಮಣ್ಣ ನಾಯ್ಕ, ವಿಧಾನ ಪರಿಷತ್ ಸದಸ್ಯರಾದ ಎಸ್ ವಿ ಸಂಕನೂರು, ಶಾಂತಾರಾಮ ಸಿದ್ದಿ, ಗಣಪತಿ ಉಳ್ವೇಕರ, ಶಿರಸಿ ನಗರ ಸಭೆ ಅಧ್ಯಕ್ಷೆ ಶರ್ಮಿಳಾ ಮಾದನಗೇರಿ ಸಹ ವೇದಿಕೆಯಲ್ಲಿರಲಿದ್ದಾರೆ. ಆದರೆ, ಇಷ್ಟೊಂದು ಗಣ್ಯರು ಭಾಗವಹಿಸುವ ಬಗ್ಗೆ ಸ್ಥಳೀಯ ನಾಯಕರಿಗೆ ಮಾಹಿತಿ ಇಲ್ಲ. ಹೀಗಾಗಿ ಮುಖ್ಯಮಂತ್ರಿ ಆಗಮನದ ತಯಾರಿಯೂ ನಡೆದಿಲ್ಲ!





