ಹಳಿಯಾಳ: ನ್ಯಾಯಮೂರ್ತಿ ಎ ಜೆ ಸದಾಶಿವ ವರದಿ ಜಾರಿಗೆ ದಲಿತ ಸಮುದಾಯದವರು ಶನಿವಾರ ಪ್ರತಿಭಟನೆ ನಡೆಸಿದರು. ಶಾಸಕ ಆರ್ ವಿ ದೇಶಪಾಂಡೆ ಅವರ ಮನೆ ಮುಂದೆ ತಮಟೆ ಬಾರಿಸಿದ ಪ್ರತಿಭಟನಾಕಾರರು ನಂತರ ತಹಶೀಲ್ದಾರ್ ಕಚೇರಿ ಮುಂದೆಯೂ ತಮಟೆ ಬಾರಿಸಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು.
`ಪರಿಶಿಷ್ಟ ಜಾತಿಯವರು ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಹಿಂದಿದ್ದಾರೆ. ಆರ್ಥಿಕವಾಗಿಯೂ ಅವರು ಅಭಿವೃದ್ಧಿ ಹೊಂದಲು ಎಜೆ ಸದಾಶಿವ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು’ ಎಂದು ಒತ್ತಾಯಿಸಿದರು. ಯಲ್ಲಾಪುರ ನಾಕಾದ ಡಾ ಬಾಬಾಸಾಹೇಬ ಅಂಬೇಡ್ಕರ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಮುಖ್ಯ ರಸ್ತೆ ಮೂಲಕ ಹೊರಟ ಮೆರವಣಿಗೆ ವಿವಿಧ ಭಾಗಗಳಲ್ಲಿ ಸಂಚರಿಸಿತು. ನಂತರ ಪ್ರತಿಭಟನಾಕಾರರು ತಹಶೀಲ್ದಾರ್ ಕಚೇರಿ ಮೂಲಕ ಮುಖ್ಯಮಂತ್ರಿಗಳಿಗೆ ತಮ್ಮ ಮನವಿ ಸಲ್ಲಿಸಿದರು.




