ಕಾರವಾರ: `ಮಳೆಗಾಲದ ವೇಳೆ ನೌಕಾನೆಲೆ ಪ್ರದೇಶದಿಂದ ಕಾರವಾರದ ಚಂಡಿಯಾ, ಅರ್ಗಾ, ಸೇರಿದಂತೆ ಹಲವು ಪ್ರದೇಶಗಳಲ್ಲಿ ನೆರೆ ಪರಿಸ್ಥಿತಿ ಉಂಟಾಗದAತೆ ಈಗಿನಿಂದಲೇ ಅಗತ್ಯ ಕ್ರಮ ಜರುಗಿಸಿ’ ಎಂದು ನೌಕಾನೆಲೆ ಹಾಗೂ ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರದವರಿಗೆ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಸೂಚನೆ ನೀಡಿದರು.
ಗುರುವಾರ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಮಾತನಾಡಿದ ಅವರು `ಪ್ರತಿ ವರ್ಷದ ಮಳೆಗಾಲದಲ್ಲಿ ನೌಕಾನಲೆ ಪ್ರದೇಶದಲ್ಲಿ ನೆರೆ ಪರಿಸ್ಥಿತಿ ಉಂಟಾಗುತ್ತಿದ್ದು, ಈ ಸಮಸ್ಯೆಗೆ ಈಗಿನಿಂದಲೇ ಮುಂಜಾಗ್ರತಾ ಕ್ರಮ ಅನಿವಾರ್ಯ. ಅಗತ್ಯ ಡ್ರಜ್ಜಿಂಗ್, ಪೈಪ್ ಅಳವಡಿಕೆ ಸೇರಿದಂತೆ ಅತ್ಯಗತ್ಯವಾದ ಕ್ರಮಗಳನ್ನು ಕೈಗೊಳ್ಳಿ’ ಎಂದು ತಿಳಿಸಿದರು.
`ನೌಕಾನಲೆಯ ಒಳಗೆ ನಡೆಯುತ್ತಿದ್ದ ಸೇತುವೆ ನಿರ್ಮಾಣ ಕಾಮಗಾರಿ ಮುಕ್ತಾಯಗೊಂಡಿದ್ದು, ಪ್ರಸ್ತುತ ರಾಷ್ಟಿçÃಯ ಹೆದ್ದಾರಿ ಮೂಲಕ ನೌಕಾನೆಲೆ ಒಳಬರುವ ಮಳೆ ನೀರು ಯಾವುದೇ ಅಡೆ ತಡೆಗಳಿಲ್ಲದೇ ಸರಾಗವಾಗಿ ಹರಿದುಹೋಗುವಂತೆ ಮಾಡಲಾಗಿದೆ’ ಎಂದು ನೌಕಾನೆಲೆ ಅಧಿಕಾರಿಗಳು ಮಾಹಿತಿ ನೀಡಿದರು. ಹಳೆಯ ಕಾಳಿ ಸೇತುವೆಯ ಅವಶೇಷಗಳ ತೆರವು ಕಾರ್ಯವನ್ನು ಮಾರ್ಚ್ 15ರೊಳಗೆ ಸಂಪೂರ್ಣವಾಗಿ ಮುಕ್ತಾಯಗೊಳಿಸುವಂತೆ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚಿಸಿದದರು. `ರಾಷ್ಟಿçÃಯ ಹೆದ್ದಾರಿ ಬದಿಯಲ್ಲಿ ಒತ್ತುವರಿ ಮಾಡಿಕೊಂಡು ನಿರ್ಮಿಸಿರುವ ಅತಿಕ್ರಮಣ ಕಟ್ಟಡಗಳನ್ನು ಕಾಲಮಿತಿಯಲ್ಲಿ ತೆರವುಗೊಳಿಸಿ’ ಎಂದು ಕುಮಟಾ ಉಪ ವಿಭಾಗಾಧಿಕಾರಿಗಳು ಮತ್ತು ಅಂಕೋಲಾ ತಹಸೀಲ್ದಾರ್ ಸೂಚಿಸಿದರು.
`ಕದ್ರಾ ಮತ್ತು ಗೇರಸೊಪ್ಪ ಜಲಾಶಯಗಳಲ್ಲಿ ಮಳೆಗಾಲದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತಂತೆ ಎಸ್.ಓ.ಪಿ ರಚಿಸಿ ಅದರಂತೆ ಕಾರ್ಯನಿರ್ವಹಿಸಬೇಕು’ ಎಂದರು. ಬೇಸಿಗೆಯಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬರಬಹುದಾದ ಸ್ಥಳಗಳ ಬಗ್ಗೆ ಸಾಕಷ್ಟು ಮುಂಚಿತವಾಗಿ ಗುರುತಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಹಾಗೂ ಕಾಡಿನಲ್ಲಿ ಬೀಳುವ ಬೆಂಕಿಯನ್ನು ನಿಯಂತ್ರಿಸುವ ಕುರಿತಂತೆ ಎಸ್.ಓ.ಪಿ. ರಚಿಸಿ, ಅಧಿಕಾರಿಗಳನ್ನು ಒಳಗೊಂಡ ಸಮಿತಿಯನ್ನು ರಚಿಸಿ ಕಾರ್ಯನಿರ್ವಹಿಸುವಂತೆ ತಿಳಿಸಿದರು.
ಸಭೆಯಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಈಶ್ವರ ಕಾಂದೂ, ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್, ಉಪ ವಿಭಾಗಾಧಿಕಾರಿಳಾದ ಕನಿಷ್ಕ, ಕಲ್ಯಾಣಿ ಕಾಂಬ್ಳೆ, ನೌಕಾನೆಲೆ ಮತ್ತು ಕೈಗಾ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಇಲಾಖಾಧಿಕಾರಿಗಳು ಹಾಜರಿದ್ದರು.





