ಅಂಕೋಲಾ: ಶಿರೂರು ಗುಡ್ಡ ಕುಸಿತದಿಂದ ಗಂಗಾವಳಿ ನದಿಯಲ್ಲಿ ಶೇಖರವಾಗಿರುವ ಮಣ್ಣು ತೆರವು ಮಾಡಲು ಸಣ್ಣ ನೀರಾವರಿ ಇಲಾಖೆ ಆಸಕ್ತಿವಹಿಸಿದೆ. ಇದಕ್ಕೆ ಅಗತ್ಯ ಅನುದಾನ ನೀಡುವುದಾಗಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಭೋಸರಾಜು ಹೇಳಿದ್ದಾರೆ.
ಶುಕ್ರವಾರ ಶಿರೂರು ಗುಡ್ಡ ಕುಸಿತದ ಪ್ರದೇಶಕ್ಕೆ ಭೇಟಿ ನೀಡಿದ ಅವರು `ಗುಡ್ಡ ಕುಸಿತದಿಂದ ನದಿಯಲ್ಲಿ ಶೇಖರವಾಗಿರುವ ಮಣ್ಣನ್ನು ತೆರವುಗೊಳಿಸದ್ದಿದ್ದಲ್ಲಿ ಮುಂದಿನ ಮಳೆಗಾಲದಲ್ಲಿ ಈ ಭಾಗದಲ್ಲಿ ಸಮಸ್ಯೆ ಉಂಟಾಗಲಿದೆ. ನದಿಯ ಹರಿವಿನಿಂದ ಮುಂದಿನ ಮಳೆಗಾಲದಲ್ಲಿ ತೊಂದರೆಯಾಗದoತೆ ನೋಡಿಕೊಳ್ಳುವುದು ಅನಿವಾರ್ಯ. ಈ ಹಿನ್ನಲೆ ಅಗತ್ಯ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿ’ ಎಂದು ಅಧಿಕಾರಿಗಳಿಗೆ ಸೂಚಿಸಿದರು.
`ಉತ್ತರ ಕನ್ನಡ ಜಿಲ್ಲೆಯಲ್ಲಿ ಗುಡ್ಡ ಕುಸಿತ ತಡೆಗೆ ಸಲ್ಲಿಸಿರುವ ಪ್ರಸ್ತಾವನೆಯ ಬಗ್ಗೆ ಜನವರಿ 16ರಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಕಂದಾಯ ಸಚಿವರೊಂದಿಗೆ ಚರ್ಚಿಸಲಾಗುವುದು. ಹೆಚ್ಚುವರಿ ಹಣ ಬೇಕಿದ್ದರೂ ಬಿಡುಗಡೆ ಮಾಡಲಾಗುವುದು. ಜೊತೆಗೆ ಮತ್ತೆ ಇಂಥ ಘಟನೆ ಮರುಕಳಿಸದಂತೆ ಅಗತ್ಯ ಕ್ರಮ ಜರುಗಿಸಲಾಗವುದು’ ಎಂದರು.




