ಪ್ರಯಾಣಿಕರನ್ನು ಹೊತ್ತು ಸಾಗಿಸುತ್ತಿದ್ದ ಸರ್ಕಾರಿ ಬಸ್ಸಿಗೆ ಟಿಪ್ಪರ್ ಗುದ್ದಿದೆ. ಪರಿಣಾಮ 15ಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ.
ಸಿದ್ದಾಪುರ ತಾಲೂಕಿನ ಮಾವಿನಗುಂಡಿ ಸರ್ಕಲ್ ಬಳಿ ಗುರುವಾರ ಈ ಅವಘಡ ನಡೆದಿದೆ. ಬಸ್ಸಿನಲ್ಲಿ 55 ಪ್ರಯಾಣಿಕರು ಸಂಚರಿಸುತ್ತಿದ್ದರು. ವೇಗವಾಗಿ ಬಂದ ಟಿಪ್ಪರ್ ಚಾಲಕ ತನ್ನ ಮುಂದಿದ್ದ ಹುಲ್ಲಿನ ಲಾರಿ ಹಿಂದಿಕ್ಕಿ ಮುಂದಿದ್ದ ಬಸ್ಸಿಗೆ ತನ್ನ ವಾಹನ ಗುದ್ದಿದ್ದಾನೆ. ಈ ದೃಶ್ಯಾವಳಿಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಬಸ್ಸಿನಲ್ಲಿದ್ದ ಪ್ರಯಾಣಿಕರು ಗಂಭೀರ ಪ್ರಮಾಣದಲ್ಲಿ ಗಾಯಗೊಂಡಿದ್ದಾರೆ. ಅವರನ್ನು ಸಾಗರ ಹಾಗೂ ಸಿದ್ದಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಲಾಗಿದೆ. ಬಸ್ ಘಟಕದ ವ್ಯವಸ್ಥಾಪಕರು ಆಸ್ಪತ್ರೆಗೆ ತೆರಳಿ ಗಾಯಗೊಂಡವರ ಆರೋಗ್ಯ ವಿಚಾರಿಸಿದರು. ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.




