ಉತ್ತರ ಕನ್ನಡ ಜಿಲ್ಲೆಯಲ್ಲಿ 2500ರಷ್ಟು ಮಹಿಳೆಯರು `ಗೃಹಲಕ್ಷ್ಮಿ ಯೋಜನೆಯ ಹಣ ಬೇಡ’ ಎಂದು ಬರೆದುಕೊಟ್ಟಿದ್ದಾರೆ. ಈ ನಡುವೆ 692 ಮಹಿಳೆಯರು ಗೃಹಲಕ್ಷ್ಮಿ ಹಣಕ್ಕಾಗಿ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ
`ಬಾಕಿಯಿರುವ ಎಲ್ಲಾ ಅರ್ಜಿ ಪರಿಶೀಲಿಸಿ, ಮಹಿಳೆಯರಿಗೆ ನ್ಯಾಯ ಒದಗಿಸಬೇಕು’ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸುಷಮಾ ಗೋಡಬೋಲೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇದರೊಂದಿಗೆ ಜಿಲ್ಲೆಯ ವಿವಿಧ ವಿಷಯಗಳ ಕುರಿತು ಅವರು ವಿಡಿಯೋ ಕಾನ್ಪರೆನ್ಸ ಮೂಲಕ ಸಭೆ ನಡೆಸಿದ್ದಾರೆ.
`ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಇಲಾಖಾ ವ್ಯಾಪ್ತಿಯ ಅನುದಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಟ್ಟಡ ಕಾಮಗಾರಿಗಳ ಬಗ್ಗೆ ಖುದ್ದು ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಕಾಮಗಾರಿಗಳಿಗೆ ನೀಡಿರುವ ಅನುದಾನದಲ್ಲಿ ಶೇ 100 ಆರ್ಥಿಕ ಪ್ರಗತಿ ಸಾಧಿಸುವುದರ ಜೊತೆ ಗುಣಮಟ್ಟವನ್ನು ಕಾಪಾಡಿಕೊಳ್ಳಬೇಕು’ ಎಂದವರು ಸೂಚಿಸಿದರು.
`ಜಿಲ್ಲೆಯಲ್ಲಿ ತೀವ್ರ ಮತ್ತು ಮಧ್ಯಮ ಅಪೌಷ್ಠಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಸೂಕ್ತ ಚಿಕಿತ್ಸೆ ಹಾಗೂ ಪೂರಕ ಆಹಾರ ಒದಗಿಸಿ ಅವರನ್ನು ಆರೋಗ್ಯವಂತರನ್ನಾಗಿಸಬೇಕು. ಮಂಗನ ಕಾಯಿಲೆ ಪ್ರಕರಣಗಳು ಹೆಚ್ಚಾಗದಂತೆ ಈಗಿನಿಂದಲೇ ಮುನ್ನೆಚ್ಚರಿಕೆ ಕ್ರಮ ಜರುಗಿಸಬೇಕು. ಆಯುಷ್ಮಾನ್ ಆರೋಗ್ಯ ಕಾರ್ಡ್ನ ಪ್ರಯೋಜನ ಜಿಲ್ಲೆಯಲ್ಲಿನ ಅರ್ಹ ಪ್ರತಿಯೊಬ್ಬರಿಗೂ ದೊರೆಯಬೇಕು. ದಾಂಡೇಲಿಯಲ್ಲಿ 100 ಹಾಸಿಗೆಗಳ ಆಸ್ಪತ್ರೆ ನಿರ್ಮಾಣದ ಕುರಿತಂತೆ ಪ್ರಸ್ತಾವನೆಯನ್ನು ಮತ್ತು ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ವಿವರಗಳನ್ನು ಸಲ್ಲಿಸಬೇಕು’ ಎಂದು ಸೂಚಿಸಿದರು.
ಯಲ್ಲಾಪುರ ತಾಲೂಕಿನ ಮಂಚಿಕೇರಿಯಲ್ಲಿ ನೂತನ ಬಿಸಿಎಂ ಹಾಸ್ಟೆಲ್ ನಿರ್ಮಾಣ ಬಗ್ಗೆ ಕ್ರಮ ಕೈಗೊಳ್ಳುವಂತೆ ಹಿಂದುಳಿದ ವರ್ಗಗಳ ಅಭಿವೃಧ್ದಿ ಇಲಾಖೆ ಅಧಿಕಾರಿಗೆ ಸೂಚಿಸಿದ ಅವರು `ಜಿಲ್ಲೆಯಲ್ಲಿನ ಯಾವುದೇ ಹಾಸ್ಟೆಲ್ಗಳಲ್ಲಿ ವಿದ್ಯಾರ್ಥಿಗಳಿಗೆ ಮೂಲಭೂತ ಸೌಲಭ್ಯಗಳ ಕೊರತೆಯಾಗದಂತೆ ಸಂಬoಧಪಟ್ಟ ಇಲಾಖೆಯ ಅಧಿಕಾರಿಗಳು ಎಚ್ಚರವಹಿಸಬೇಕು. ಹಾಸ್ಟೆಲ್ಗಳನ್ನು ನಿರ್ವಹಿಸುವ ಇಲಾಖೆಗಳ ಅಧಿಕಾರಿಗಳು, ತಮ್ಮ ಹಂತದಲ್ಲಿಯೇ ಅಂತರ್ ಇಲಾಖಾ ಹಾಸ್ಟೆಲ್ಗಳ ಪರಿಶೀಲನೆ ಕೈಗೊಂಡು ಹೆಚ್ಚಿನ ಸುಧಾರಣೆ ನಡೆಸಬೇಕು’ ಎಂದರು.
`ಜಿಲ್ಲೆಯಲ್ಲಿ ಕ್ರೀಡೆಯ ಬೆಳವಣಿಗೆಗೆ ಹೆಚ್ಚಿನ ಆದ್ಯತೆ ನೀಡಬೇಕು, ಹೊರಾಂಗಣ ಕ್ರೀಡಾಂಗಣಗಳು ಇಲ್ಲದ ಪ್ರದೇಶದಲ್ಲಿ ಒಳಾಂಗಣ ಕ್ರೀಡಾಂಗಣಗಳನ್ನು ತೆರೆಯಲು ಆದ್ಯತೆ ನೀಡಬೇಕು. ಕ್ರೀಡಾಂಗಣಗಳಲ್ಲಿ ಸಾಧಕ ಕ್ರೀಡಾಪಟುಗಳ ಬಗ್ಗೆ ಮತ್ತು ಕ್ರೀಡಾ ಆರೋಗ್ಯದ ಕುರಿತು ಪುಸ್ತಕಗಳನ್ನು ಕ್ರೀಡಾಪಟುಗಳಿಗೆ ಒದಗಿಸಬೇಕು. ಕ್ರೀಡಾಂಗಣಗಳ ಅಭಿವೃಧ್ದಿಗೆ ಜಿಲ್ಲೆಯಲ್ಲಿನ ವಿವಿಧ ಉದ್ದಿಮೆಗಳಲ್ಲಿರುವ ಸಾಮಾಜಿಕ ಹೊಣೆಗಾರಿಕಾ ನಿಧಿಯನ್ನು ಬಳಸಬೇಕು’ ಎಂದು ತಿಳಿಸಿದರು.







