ನ್ಯಾಯಮೂರ್ತಿ ಯಶವಂತ ವರ್ಮ ಅವರ ವಿರುದ್ಧದ ಆರೋಪಗಳನ್ನು ತನಿಖೆಗೆಂದು ರಚಿಸಲಾದ ಮೂವರು ಸದಸ್ಯರ ಸಮಿತಿಗೆ ಸದಸ್ಯ ಕಾರ್ಯದರ್ಶಿಯಾಗಿ ಯಲ್ಲಾಪುರ ತಾಲೂಕಿನ ಅಣಲಗಾರ ಸಮೀಪದ ಬಿದ್ರೆಪಾಲಿನ ನಿವೃತ್ತ ಐ.ಆರ್.ಎಸ್ ಅಧಿಕಾರಿ ಜಿ.ಆರ್.ಭಟ್ಟ ಅವರನ್ನು ನೇಮಕ ಮಾಡಲಾಗಿದೆ.
ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ನೇಮಕ ಮಾಡಿ ಆದೇಶಿಸಿದ್ದಾರೆ. ಸಮಿತಿಯ ಸದಸ್ಯರಾಗಿ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಅರವಿಂದ್ ಕುಮಾರ್, ಮದ್ರಾಸ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಮನೀಂದ್ರ ಮೋಹನ್ ಶ್ರೀವಾಸ್ತವ, ಹಾಗೂ ಹಿರಿಯ ವಕೀಲ ಬಿ.ವಿ.ಆಚಾರ್ಯ ನಿಯುಕ್ತಿಯಾಗಿದ್ದಾರೆ.
ಯಲ್ಲಾಪುರ ತಾಲೂಕಿನ ನಂದೊಳ್ಳಿಯ ಅಣಲಗಾರ ಸಮೀಪದ ಬಿದ್ರೆಪಾಲಿನವರಾದ ಭಟ್ಟರು, ಧಾರವಾಡದಲ್ಲಿ ಬಿ.ಎ., ಪುಣೆಯಲ್ಲಿ ಎಂ.ಎ. ಮಾಡಿ, 2010ರಲ್ಲಿ ಆರ್ಥಿಕಶಾಸ್ತ್ರದಲ್ಲಿ ಪಿಎಚ್.ಡಿ. ಪೂರೈಸಿದ್ದಾರೆ. ದೆಹಲಿ ವಿಶ್ವವಿದ್ಯಾಲಯದಿಂದ ಎಲ್.ಎಲ್.ಬಿ. ಪದವಿಯನ್ನೂ ಪಡೆದಿದ್ದಾರೆ.
1989ನೇ ಬ್ಯಾಚ್ನ (ಆದಾಯ ತೆರಿಗೆ) ಐಆರ್ಎಸ್ ಅಧಿಕಾರಿಯಾಗಿರುವ ಜಿ.ಆರ್.ಭಟ್ಟ ಇತ್ತೀಚೆಗೆ ಕರ್ನಾಟಕ ಮತ್ತು ಗೋವಾ ಪ್ರಾದೇಶಿಕ ಆದಾಯ ತೆರಿಗೆ ಇಲಾಖೆಯ ಪ್ರಧಾನ ಮುಖ್ಯ ಆಯುಕ್ತ ಸ್ಥಾನದಿಂದ ನಿವೃತ್ತರಾಗಿದ್ದಾರೆ. ದೆಹಲಿಯಲ್ಲಿ ಅಂತಾರಾಷ್ಟ್ರೀಯ ತೆರಿಗೆ ವಿಭಾಗದ ಪ್ರಧಾನ ಮುಖ್ಯ ಆಯುಕ್ತರಾಗಿ ಸೇವೆ ಸಲ್ಲಿಸಿದ್ದರು. ಆದಾಯ ತೆರಿಗೆ ಇಲಾಖೆಯ ಮೂರು ದಶಕಗಳಿಗಿಂತ ಹೆಚ್ಚಿನ ವೃತ್ತಿಜೀವನದಲ್ಲಿ ಅವರು ಹಲವಾರು ಹುದ್ದೆಗಳನ್ನು ನಿರ್ವಹಿಸಿದ್ದಾರೆ.
ಅನೇಕ ರೋಚಕ ಪ್ರಕರಣಗಳಲ್ಲಿ ಆದಾಯ ತೆರಿಗೆ ತನಿಖೆಗಳನ್ನು ನಡೆಸಿ ಶೋಧ ಮತ್ತು ವಶಪಡಿಸಿಕೊಳ್ಳುವ ಕಾರ್ಯಾಚರಣೆಗೆ ಕಾರಣರಾಗಿದ್ದರು. ಭಾರತೀಯ ಪ್ರಜೆಗಳು ಹೊಂದಿರುವ ಗಡಿಯಾಚೆಗಿನ ಹಣಕಾಸು ವ್ಯವಹಾರಗಳು, ಸಾಗರೋತ್ತರ ಆಸ್ತಿಗಳು ಮತ್ತು ವಿದೇಶಿ ಬ್ಯಾಂಕ್ ಖಾತೆಗಳ ಕುರಿತು ಮಾಹಿತಿ ಸಂಗ್ರಹಿಸುವಲ್ಲಿ ಅವರು ಪ್ರಮುಖ ಪಾತ್ರವಹಿಸಿದ್ದರು.
ಲೋಕಸಭೆಯ ಹೆಚ್ಚುವರಿ ಕಾರ್ಯದರ್ಶಿಯಾಗಿ ಹಲವಾರು ಸಂಸದೀಯ ಸಮಿತಿಗಳ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದರು. ಟ್ಯಾಕ್ಸ್ ಪಾಲಿಸಿ ಮತ್ತು ಎಫ್.ಡಿ.ಐ ಎಂಬ ಪುಸ್ತಕವನ್ನೂ ಬರೆದಿದ್ದಾರೆ.







