ಶಿರಸಿ ಶೈಕ್ಷಣಿಕ ಜಿಲ್ಲೆಯ ಜಿಲ್ಲಾ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟ ಸೆ 22 ರಂದು ಬೆಳಿಗ್ಗೆ 9.30 ಕ್ಕೆ ಪಟ್ಟಣದ ಕಾಳಮ್ಮನಗರ ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಬಿಇಒ ರೇಖಾ ನಾಯ್ಕ ಹೇಳಿದರು.
ಅವರು ಯಲ್ಲಾಪುರದ ಬಿಇಒ ಕಾರ್ಯಾಲಯದಲ್ಲಿ ಮಾಧ್ಯಮದವರಿಗೆ ಈ ಕುರಿತು ಮಾಹಿತಿ ನೀಡಿದರು. ಉದ್ಘಾಟನಾ ಸಮಾರಂಭದಲ್ಲಿ
ಶಾಸಕ ಶಿವರಾಮ ಹೆಬ್ಬಾರ ಅಧ್ಯಕ್ಷತೆ ವಹಿಸಲಿದ್ದಾರೆ. ಅಧಿಕಾರಿಗಳು, ಜನಪ್ರತಿನಿಧಿಗಳು ಭಾಗವಹಿಸುತ್ತಾರೆ ಎಂದರು.
ದೈಹಿಕ ಶಿಕ್ಷಣ ಪರಿವೀಕ್ಷಕ ಪ್ರಕಾಶ ತಾರೀಕೊಪ್ಪ ಮಾತನಾಡಿ, ಕ್ರೀಡಾಕೂಟದ ಯಶಸ್ಸಿಗಾಗಿ ಹಲವಾರು ಸಮಿತಿಗಳನ್ನು ರಚಿಸಲಾಗಿದೆ. ಶಿರಸಿ ಶೈಕ್ಷಣಿಕ ಜಿಲ್ಲಾ ವ್ಯಾಪ್ತಿಯ 1200 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ದೂರದ ತಾಲೂಕುಗಳಿಂದ ಬರುವ ವಿದ್ಯಾರ್ಥಿಗಳಿಗೆ
ವಸತಿ ವ್ಯವಸ್ಥೆ ಮಾಡಲಾಗಿದೆ. ಕಬ್ಬಡಿ, ಖೋಖೋ, ಬಾಲ ಬ್ಯಾಡ್ಮಿಂಟನ್, ವಾಲಿಬಾಲ್ ಸೇರಿದಂತೆ 10 ಗುಂಪು ಆಟಗಳ ಸ್ಪರ್ಧೆ ನಡೆಯಲಿದೆ. ಜಿಲ್ಲೆಯ ವಿವಿಧ ಭಾಗದ 100 ನಿರ್ಣಾಯಕರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದರು.
ಪ್ರೌಢಶಾಲಾ ಸಹಶಿಕ್ಷಕ ಸಂಘದ ತಾಲೂಕು ಅಧ್ಯಕ್ಷ ಚಂದ್ರಶೇಖರ ಎಸ್ ಸಿ, ಕಾರ್ಯದರ್ಶಿ ವೆಂಕಟೇಶ ಪಾಲನಕರ, ಶಿಕ್ಷಣ ಸಂಯೋಜಕ ಪ್ರಶಾಂತ ಜಿ ಎನ್ ಇದ್ದರು.







