ಯಲ್ಲಾಪುರ ತಾಲೂಕಿನ ಕರಡೊಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಶಿಥಿಲಗೊಂಡಿದ್ದು, ಹೊಸ ಕಟ್ಟಡ ಮಂಜೂರಿಗಾಗಿ ಆಗ್ರಹಿಸಿ ಗ್ರಾಮಸ್ಥರು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.
ಕಟ್ಟಡ ತೀರಾ ಹಳೆಯದಾಗಿದ್ದು, ಮೇಲ್ಛಾವಣಿ ಕುಸಿದು ಬೀಳುವ ಹಂತದಲ್ಲಿದೆ. ಗೋಡೆಗಳು ಅಲ್ಲಲ್ಲಿ ಬಿರುಕು ಬಿಟ್ಟು, ವಿದ್ಯಾರ್ಥಿಗಳು ಭಯದಲ್ಲೇ ಶಾಲೆಯ ಶೈಕ್ಷಣಿಕ ಚಟುವಟಿಕೆಗಳಲ್ಲಿ ಭಾಗವಹಿಸುತ್ತಿದ್ದಾರೆ. 40 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಗೋಡೆ, ಮೇಲ್ಛಾವಣಿ ಕುಸಿದು ಅಪಾಯ ಉಂಟಾಗುವ ಸಾಧ್ಯತೆಯಿದೆ.
ಅವಘಡ ಉಂಟಾಗುವ ಮೊದಲೇ ಹೊಸ ಕಟ್ಟಡ ನಿರ್ಮಿಸಿ, ಮಕ್ಕಳ ಸುರಕ್ಷತೆಗೆ ಕ್ರಮ ಆಗಬೇಕಾಗಿದೆ. ಈಗಾಗಲೇ ಡಿಡಿಪಿಐ ಅವರಿಗೂ ಮನವಿ ಸಲ್ಲಿಸಿದ್ದೇವೆ. ಆದರೆ ಅವರಿಂದ ಯಾವುದೇ ಸ್ಪಂದನೆ ದೊರೆತಿಲ್ಲ. ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿ, ಶಾಲೆಗೆ ಎರಡು ನೂತನ ಕೊಠಡಿಗಳನ್ನು ಮಂಜೂರಿ ಮಾಡಿಕೊಡಬೇಕೆಂದು ಆಗ್ರಹಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಸಂಸದ ಕಾಗೇರಿ, ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಕರ್ನಾಟಕ ರಾಜ್ಯ ಧನಗರ ಗೌಳಿ ಯುವ ಸೇನೆಯ ಖಜಾಂಚಿ ಲಕ್ಷ್ಮಣ ಕೋಕರೆ, ಎಸ್.ಡಿ.ಎಂ.ಸಿ ಅಧ್ಯಕ್ಷ ಗಂಗಾರಾಮ ಪದ್ದು ಕೋಕರೆ, ಹುಣಶೆಟ್ಟಿಕೊಪ್ಪದ ಶ್ರೀ ಗ್ರಾಮದೇವಿ ವಿವಿಧೋದ್ದೇಶಗಳ ಪ್ರಾಥಮಿಕ ಸಹಕಾರಿ ಸಂಘದ ಅಧ್ಯಕ್ಷ ಮಹೇಶ ದೇಸಾಯಿ, ಸಾಮಾಜಿಕ ಕಾರ್ಯಕರ್ತರಾದ ಚಂದು ಮಡಕರ್, ಶ್ಯಾಮ ಸಿಂಧೆ, ಗ್ರಾಮಸ್ಥರಾದ ಧಾಕು ಜೋರೆ, ಘಾಟು ಸಿಂಧೆ, ವಿಷ್ಣು ಕೋಕರೆ, ಸಂತೋಷ್ ಕೋಕರೆ, ರಾಮಾನಾಥ್ ಸಿಂಧೆ ಇತರರಿದ್ದರು.







