ಯಲ್ಲಾಪುರ ತಾಲೂಕಿನ ಕಿರವತ್ತಿಯಲ್ಲಿ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡವನ್ನು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಪ್ರತಿ ತಾಲೂಕು ಆಸ್ಪತ್ರೆಯಲ್ಲಿ ತಲಾ ಎರಡು ಸ್ತ್ರೀ ರೋಗ ತಜ್ಞರು, ಮಕ್ಕಳ ತಜ್ಞರು, ಅರವಳಿಕೆ ತಜ್ಞರು, ಒಬ್ಬ ರೇಡಿಯೊಲಜಿಸ್ಟ್ ನೇಮಕಕ್ಕೆ ಸರ್ಕಾರ ನಿರ್ಣಯಿಸಿದೆ. ಸರ್ಕಾರ ಎಲ್ಲಾ ಇಲಾಖೆಗಳಲ್ಲೂ ಅಭಿವೃದ್ಧಿಗೆ ಆದ್ಯತೆ ನೀಡಿ ಕಾರ್ಯನಿರ್ವಹಿಸುತ್ತಿದೆ ಎಂದರು.
390 ಆಶಾಕಿರಣ ಕೇಂದ್ರದ ಮೂಲಕ ಉಚಿತವಾಗಿ ಕಣ್ಣಿನ ತಪಾಸಣೆ, ಕನ್ನಡಕ, ಶಸ್ತ್ರ ಚಿಕಿತ್ಸೆಯಂತಹ ಸೌಲಭ್ಯ ನೀಡಲಾಗುತ್ತಿದೆ. ಆಶಾ ಕಾರ್ಯಕರ್ತರಿಗೆ 1500 ರೂ ಗೌರವಧನ ಹೆಚ್ಚಳಕ್ಕೆ ನಿರ್ಣಯ ಕೈಗೊಳ್ಳಲಾಗಿದೆ ಎಂದ ಅವರು ಅಗತ್ಯ ಸಿಬ್ಬಂದಿ, ಸಲಕರಣೆಗಳನ್ನು ಮಂಜೂರಿ ಮಾಡಲು ಕ್ರಮ ಕೈಗೊಳ್ಳಲಾಗುವುದೆಂದರು.
ಶಾಸಕ ಶಿವರಾಮ ಹೆಬ್ಬಾರ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಟ್ಟಡ ಉದ್ಘಾಟನೆಗೆ ತಕ್ಷಣ ಸ್ಪಂದಿಸಿದ ಸಚಿವರು, ಅಗತ್ಯವಾದ ಸಿಬ್ಬಂದಿ, ಸಲಕರಣೆಗಳನ್ನು ಕೂಡ ಶೀಘ್ರ ಒದಗಿಸಿದರೆ ಹಿಂದುಳಿದ ವರ್ಗದವರೇ ಹೆಚ್ಚಾಗಿರುವ ಈ ಭಾಗದ ರೋಗಿಗಳಿಗೆ ಅನುಕೂಲವಾಗುತ್ತದೆ ಎಂದರು.
ವಿಧಾನ ಪರಿಷತ್ ಸದಸ್ಯ ಶಾಂತಾರಾಮ ಸಿದ್ದಿ, ಸವದತ್ತಿ ಶಾಸಕ ವಿಶ್ವಾಸ ವೈದ್ಯ, ಗ್ರಾ.ಪಂ ಅಧ್ಯಕ್ಷೆ ಸಂಗೀತಾ ಕೊಕರೆ, ತಹಸೀಲ್ದಾರ ಚಂದ್ರಶೇಖರ ಹೊಸ್ಮನಿ, ತಾ.ಪಂ ಇಒ ರಾಜೇಶ ಧನವಾಡಕರ್, ವಿಭಾಗೀಯ ಜಂಟಿ ನಿರ್ದೇಶಕಿ ಡಾ.ಪುಷ್ಪಾ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎಸ್.ಭಟ್ಟ, ಜಿ.ಪಂ ಮಾಜಿ ಸದಸ್ಯ ವಿಜಯ ಮಿರಾಶಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಬಿ.ಎನ್.ನೀರಜ, ತಾಲೂಕು ಆರೋಗ್ಯಾಧಿಕಾರಿ ಡಾ.ನರೇಂದ್ರ ಪವಾರ ಇದ್ದರು. ಶಿಕ್ಷಕ ಸುಧಾಕರ ನಾಯಕ ನಿರ್ವಹಿಸಿದರು.







