ಪಡಿತರ ವಿತರಣೆಗೆ ಬಯೋಮೆಟ್ರಿಕ್ ಕಡ್ಡಾಯ: ಅಕ್ರಮ ಸಾಗಾಟಕ್ಕೆ ಕಡಿವಾಣ ಹಾಕಿ–ಎಸ್.ಆರ್. ಪಾಟೀಲ್
ಹಾವೇರಿ, ಸೆ. 4: ಸರ್ಕಾರದ ಅನ್ನಭಾಗ್ಯ ಸೇರಿದಂತೆ ಎಲ್ಲ ಗ್ಯಾರಂಟಿ ಯೋಜನೆಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಬೇಕು. ಪಡಿತರ ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್.ಆರ್. ಪಾಟೀಲ್ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಡ ಜನರು ಹಸಿವಿನಿಂದ ಮುಕ್ತರಾಗಬೇಕು ಎನ್ನುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಆಹಾರ ಇಲಾಖೆಯ ಅಧಿಕಾರಿಗಳು, ಆಹಾರ ನಿರೀಕ್ಷಕರು ಹಾಗೂ ನ್ಯಾಯಬೆಲೆ ಅಂಗಡಿಗಳ ವಿತರಕರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು.
ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಿ
ಸ್ಥಳೀಯವಾಗಿ ಎದುರಾಗುವ ಸಣ್ಣಪುಟ್ಟ ಸಮಸ್ಯೆಗಳನ್ನು ಗುರುತಿಸಿ ಪರಿಹರಿಸುವ ಉದ್ದೇಶದಿಂದ ಸಭೆ ನಡೆಸಲಾಗಿದೆ. ಹಿಂದಿನ ಘಟನೆಗಳು ಮರುಕಳಿಸದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು. ಯಾವುದೇ ಫಲಾನುಭವಿಯಿಂದ ಪಡಿತರ ಸಿಗಲಿಲ್ಲ ಎಂಬ ದೂರು ಬರದಂತೆ ಕ್ರಮ ಕೈಗೊಳ್ಳಬೇಕು ಎಂದು ಎಸ್.ಆರ್. ಪಾಟೀಲ್ ಸೂಚಿಸಿದರು.
ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವುದು, ಗೊಂದಲ ಸೃಷ್ಟಿಸುವುದು ಅಥವಾ ಪಡಿತರ ವಿತರಣೆಯಲ್ಲಿ ಅಕ್ರಮ ಎಸಗುವುದು ಕಂಡುಬಂದರೆ ಯಾರೇ ಆಗಿರಲಿ ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಅಗತ್ಯವಿದ್ದಲ್ಲಿ ಅಮಾನತು ಸೇರಿದಂತೆ ಕಾನೂನು ಕ್ರಮ ಜರುಗಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಒಂದು ತಿಂಗಳು ಮುಂಚಿತವಾಗಿ ಪಡಿತರ ಹಂಚಿಕೆಗೆ ಸಲಹೆ
ಹಾವೇರಿ ಜಿಲ್ಲೆಯಲ್ಲಿ ಒಟ್ಟು 4,57,996 ರೇಷನ್ ಕಾರ್ಡ್ಗಳಿದ್ದು, ಈ ಪೈಕಿ 45,849 ಅಂತ್ಯೋದಯ ಕಾರ್ಡ್ಗಳು, 3,46,626 ಬಿಪಿಎಲ್ (PHH) ಕಾರ್ಡ್ಗಳು ಹಾಗೂ 65,521 ಎಪಿಎಲ್ ಕಾರ್ಡ್ಗಳಿವೆ.
ಜಿಲ್ಲೆಯಲ್ಲಿ ಒಟ್ಟು 465 ನ್ಯಾಯಬೆಲೆ ಅಂಗಡಿಗಳಿದ್ದು, 360 ಅಂಗಡಿಗಳು ಸೊಸೈಟಿ ಅಡಿಯಲ್ಲಿ ಹಾಗೂ 105 ಅಂಗಡಿಗಳು ಖಾಸಗಿ ವಿತರಕರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿವೆ.
ಸಾರ್ವಜನಿಕರಿಗೆ ವೇಗವಾಗಿ ಪಡಿತರ ವಿತರಿಸುವ ಉದ್ದೇಶದಿಂದ ಒಂದು ತಿಂಗಳು ಮುಂಚಿತವಾಗಿಯೇ ಪಡಿತರ ಹಂಚಿಕೆ ಮಾಡುವಂತೆ ಸಭೆಯಲ್ಲಿ ಸಲಹೆ ನೀಡಲಾಯಿತು.
ಇದಕ್ಕೆ ಪ್ರತಿಕ್ರಿಯಿಸಿದ ಆಹಾರ ಇಲಾಖೆಯ ಅಧಿಕಾರಿಗಳು, ಪ್ರತಿ ತಿಂಗಳ 10ನೇ ತಾರೀಖಿನೊಳಗೆ ಗೋದಾಮುಗಳಿಗೆ ಪಡಿತರ ಬಂದರೆ ವಿತರಣೆಗೆ ಅನುಕೂಲವಾಗಲಿದೆ. ಈ ಕುರಿತು ಸರ್ಕಾರದ ಹಂತದಲ್ಲಿ ಚರ್ಚಿಸಿ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಮನವಿ ಮಾಡಿದರು.
ಬಯೋಮೆಟ್ರಿಕ್ ಹಾಗೂ ಸರ್ವರ್ ಸಮಸ್ಯೆ ಪರಿಹರಿಸಲು ಸೂಚನೆ
ಪಡಿತರ ವಿತರಣೆಗೆ ಬಯೋಮೆಟ್ರಿಕ್ ಕಡ್ಡಾಯವಾಗಿದ್ದು, ಕೆಲವೊಮ್ಮೆ ಬೆರಳಚ್ಚು ಪಡೆಯುವಲ್ಲಿ ತೊಂದರೆ ಉಂಟಾಗುತ್ತಿದೆ. ಸರ್ವರ್ ಸಮಸ್ಯೆಗಳನ್ನು ಕಾಲಕಾಲಕ್ಕೆ ಪರಿಹರಿಸಬೇಕು ಎಂದು ಎಸ್.ಆರ್. ಪಾಟೀಲ್ ಸೂಚಿಸಿದರು.
ತಾಂತ್ರಿಕ ತೊಂದರೆಗಳನ್ನು ನಿವಾರಿಸುವುದರ ಜೊತೆಗೆ ಜಿಲ್ಲೆಯ ಎಲ್ಲ ಪಡಿತರ ವಿತರಕರು ಪಡಿತರ ವಿತರಣೆಗೆ ಅಗತ್ಯವಿರುವ ಮಾಂತ್ರಾ ಹಾಗೂ ಐರಿಸ್ ಬಯೋಮೆಟ್ರಿಕ್ ಸಾಧನಗಳನ್ನು ಕಡ್ಡಾಯವಾಗಿ ಹೊಂದಿರಬೇಕು ಎಂದರು.
ಜಿಲ್ಲೆಯಲ್ಲಿ ತಿಂಗಳಿಗೆ 45 ಸಾವಿರ ಕ್ವಿಂಟಲ್ ಜೋಳದ ಅವಶ್ಯಕತೆ
ಪ್ರಸ್ತುತ ಅಂತ್ಯೋದಯ ರೇಷನ್ ಕಾರ್ಡ್ದಾರರಿಗೆ 21 ಕೆ.ಜಿ. ಜೋಳ ಹಾಗೂ 14 ಕೆ.ಜಿ. ಅಕ್ಕಿ ನೀಡಲಾಗುತ್ತಿದೆ. ಬಿಪಿಎಲ್ ಕಾರ್ಡ್ದಾರರಿಗೆ ಪ್ರತಿ ಸದಸ್ಯರಿಗೆ 3 ಕೆ.ಜಿ. ಜೋಳ ಹಾಗೂ 2 ಕೆ.ಜಿ. ಅಕ್ಕಿ ವಿತರಿಸಲಾಗುತ್ತಿದೆ.
ಜಿಲ್ಲೆಗೆ ಪ್ರತಿ ತಿಂಗಳು ಸುಮಾರು 45 ಸಾವಿರ ಕ್ವಿಂಟಲ್ ಜೋಳದ ಅವಶ್ಯಕತೆ ಇದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಪಡಿತರ ವಿತರಣೆಯಲ್ಲಿ ಹಾವೇರಿ ಜಿಲ್ಲೆ ರಾಜ್ಯದಲ್ಲೇ ನಂಬರ್ ಒನ್
ಹಾವೇರಿ ಜಿಲ್ಲೆ ಸಾರ್ವಜನಿಕರಿಗೆ ಪಡಿತರ ವಿತರಿಸುವಲ್ಲಿ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ ಎಂದು ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.
ಅನ್ನ ಸುವಿಧಾ ಯೋಜನೆಯಡಿ 85 ವರ್ಷ ಮೇಲ್ಪಟ್ಟ ಫಲಾನುಭವಿಗಳಿಗೆ ಮನೆಮನೆಗೆ ತೆರಳಿ ಪಡಿತರ ವಿತರಿಸಲಾಗುತ್ತಿದೆ.
ಇತ್ತೀಚೆಗೆ ರಾಣೆಬೆನ್ನೂರು ನಗರದಲ್ಲಿ ಪಡಿತರ ವಿತರಣೆಯಲ್ಲಿ ಗೊಂದಲ ಉಂಟುಮಾಡಿದ ಅಂಗಡಿಕಾರನಿಗೆ ನೋಟಿಸ್ ನೀಡಿ ವರದಿ ಕೇಳಲಾಗಿದೆ. ಈ ಕುರಿತು ಪ್ರಕರಣವೂ ದಾಖಲಿಸಲಾಗಿದ್ದು, ಆತನ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಎಸ್.ಆರ್. ಪಾಟೀಲ್ ಅಧಿಕಾರಿಗಳಿಗೆ ಸೂಚಿಸಿದರು.
ಅಕ್ರಮ ಸಾಗಾಟದ ವಿರುದ್ಧ 20 ಪ್ರಕರಣ ದಾಖಲು
ಜಿಲ್ಲೆಯಲ್ಲಿ ಪಡಿತರವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದವರ ವಿರುದ್ಧ ಇದುವರೆಗೆ 20 ಪ್ರಕರಣಗಳನ್ನು ದಾಖಲಿಸಲಾಗಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಮುಂದೆಯೂ ಪಡಿತರ ಅಕ್ರಮ ಸಾಗಾಟದಂತಹ ಪ್ರಕರಣಗಳು ಮರುಕಳಿಸದಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಎಸ್.ಆರ್. ಪಾಟೀಲ್ ಸೂಚಿಸಿದರು.




