ಹಾವೇರಿ: ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಬಿ.ಸಿ. ಪಾಟೀಲ್ ಅವರು ಬಿಜೆಪಿ ನಡೆಸುತ್ತಿರುವ ಪಾದಯಾತ್ರೆ ಕುರಿತು ಮಾತನಾಡಿದ್ದು, ನಾಗೇಂದ್ರ ವಿಚಾರವನ್ನೇ ಇಟ್ಟುಕೊಂಡು ಪಾದಯಾತ್ರೆ ಮಾಡುತ್ತಿಲ್ಲ ಎಂದು ಹೇಳಿದ್ದಾರೆ.
ರಾಜ್ಯಾದ್ಯಂತ ಬರ ಪರಿಸ್ಥಿತಿ ಉಂಟಾಗಿದ್ದು, ರೈತರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ರಾಜ್ಯವನ್ನು ಲೂಟಿ ಮಾಡುತ್ತಿದೆ ಎಂದು ಆರೋಪಿಸಿದ ಅವರು, ಈ ಎಲ್ಲ ವಿಚಾರಗಳನ್ನು ಮುಂದಿಟ್ಟುಕೊಂಡು ಪಾದಯಾತ್ರೆ ನಡೆಸಲಾಗುತ್ತಿದೆ ಎಂದರು.
ದಲಿತರ ಹಣದ ಅವ್ಯವಹಾರ ಆರೋಪ ಎದುರಿಸಿದ ನಾಗೇಂದ್ರ ಅವರನ್ನು ಮತ್ತೆ ಸಚಿವರನ್ನಾಗಿ ಮಾಡಿರುವುದು ಸರ್ಕಾರದ ಭ್ರಷ್ಟಾಚಾರಕ್ಕೆ ನೀಡುತ್ತಿರುವ ಬೆಂಬಲಕ್ಕೆ ಉದಾಹರಣೆ ಎಂದು ಬಿ.ಸಿ. ಪಾಟೀಲ್ ಆರೋಪಿಸಿದರು.
“ವಾಲ್ಮೀಕಿ ಸಮಾಜದಿಂದ ಸಚಿವರನ್ನಾಗಿ ಮಾಡಲು ಬೇರೆ ಶಾಸಕರೇ ಇರಲಿಲ್ಲವೇ?” ಎಂದು ಪ್ರಶ್ನಿಸಿದ ಅವರು, ಭ್ರಷ್ಟಾಚಾರಕ್ಕೆ ಸರ್ಕಾರ ಎಷ್ಟು ಕುಮ್ಮಕ್ಕು ನೀಡುತ್ತಿದೆ ಎಂಬುದಕ್ಕೆ ಇದೇ ಉದಾಹರಣೆ ಎಂದು ಟೀಕಿಸಿದರು.




