ಜಿಮ್ಗೆ ತೆರಳುತ್ತಿದ್ದ ಮಹಿಳೆಯ ಚೈನ್ ಕಿತ್ತುಕೊಂಡ ಕಳ್ಳರು; ರಾಣೇಬೆನ್ನೂರಲ್ಲಿ 2.5 ಲಕ್ಷದ ಚಿನ್ನದ ಸರ ಕಳವು
ರಾಣೇಬೆನ್ನೂರು: ಜಿಮ್ಗೆ ತೆರಳುತ್ತಿದ್ದ ಮಹಿಳೆಯೊಬ್ಬರ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದ ಬಸ್ ನಿಲ್ದಾಣದ ಬಳಿ ನಡೆದಿದೆ.
ರಾಣೇಬೆನ್ನೂರು ನಗರದ ನಿವಾಸಿ ಮಂಜುಳಾ ಎಂಬುವವರಿಗೆ ಸೇರಿದ ಚಿನ್ನದ ಸರವನ್ನು ಕಳ್ಳರು ಕಿತ್ತುಕೊಂಡಿದ್ದಾರೆ ಎನ್ನಲಾಗಿದೆ. ಮಹಿಳೆ ತೆರಳುತ್ತಿದ್ದ ವೇಳೆ ಏಕಾಏಕಿ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು, ಮಹಿಳೆಯ ಬಳಿ ಬಂದು ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ.
ಕಳ್ಳತನಕ್ಕೊಳಗಾದ ಚಿನ್ನದ ಸರವು ಸುಮಾರು 25 ಗ್ರಾಂ ತೂಕದ್ದಾಗಿದ್ದು, ಅಂದಾಜು 2.5 ಲಕ್ಷ ರೂಪಾಯಿ ಮೌಲ್ಯ ಹೊಂದಿದೆ ಎಂದು ತಿಳಿದುಬಂದಿದೆ. ಚಿನ್ನದ ಸರ ಕಳೆದುಕೊಂಡ ಮಹಿಳೆ ಕಂಗಾಲಾಗಿದ್ದಾರೆ.
ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಡಿವೈಎಸ್ಪಿ ಲೋಕೇಶ್ ಹಾಗೂ ರಾಣೇಬೆನ್ನೂರು ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಳ್ಳರನ್ನು ಪತ್ತೆಹಚ್ಚಲು ಪೊಲೀಸರು ಬಸ್ ನಿಲ್ದಾಣ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ CCTV ಕ್ಯಾಮೆರಾಗಳ ದೃಶ್ಯಗಳನ್ನು ಪರಿಶೀಲಿಸುತ್ತಿದ್ದಾರೆ. ಬೈಕ್ನಲ್ಲಿ ಬಂದಿದ್ದ ದುಷ್ಕರ್ಮಿಗಳ ಚಲನವಲನ ಹಾಗೂ ಕಳ್ಳತನದ ದೃಶ್ಯಗಳ ಆಧಾರದ ಮೇಲೆ ಆರೋಪಿಗಳ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
ಈ ಘಟನೆ ರಾಣೇಬೆನ್ನೂರು ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.




