ಹಾವೇರಿ: ಜಿಲ್ಲೆಯಲ್ಲಿ ಸೆಪ್ಟೆಂಬರ್ 14ರಿಂದ ಗೌರಿ-ಗಣೇಶ ಹಬ್ಬದ ಆಚರಣೆ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಹಾವೇರಿ ಜಿಲ್ಲಾ ಪೊಲೀಸರು ಕಾನೂನು ಸುವ್ಯವಸ್ಥೆ ಕಾಪಾಡಲು ವ್ಯಾಪಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.
ಜಿಲ್ಲೆಯಾದ್ಯಂತ ಸುಮಾರು 2,315 ಸಾರ್ವಜನಿಕ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ನಡೆಯಲಿದ್ದು, ಸುಮಾರು ಒಂದು ತಿಂಗಳ ಕಾಲ ವಿವಿಧ ದಿನಾಂಕಗಳಲ್ಲಿ ಗಣೇಶ ವಿಸರ್ಜನೆ ಪ್ರಕ್ರಿಯೆ ನಡೆಯಲಿದೆ. ಹಬ್ಬದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ವತಿಯಿಂದ ಗಣೇಶ ಆಯೋಜಕರು ಮತ್ತು ವಿವಿಧ ಕೋಮಿನ ಮುಖಂಡರೊಂದಿಗೆ ಸೌಹಾರ್ದ ಸಭೆಗಳನ್ನು ನಡೆಸಲಾಗಿದೆ.
ಗಣೇಶ ಹಬ್ಬದ ಬಂದೋಬಸ್ತ್ ಕರ್ತವ್ಯಕ್ಕಾಗಿ ಜಿಲ್ಲೆಯಿಂದ 1 ಎಸ್ಪಿ, 1 ಹೆಚ್ಚುವರಿ ಎಸ್ಪಿ, 5 ಡಿಎಸ್ಪಿ, 15 ಸಿಪಿಐ/ಪಿಐ, 45 ಪಿಎಸ್ಐ, 50 ಎಎಸ್ಐ, 500 ಹೆಡ್ ಕಾನ್ಸ್ಟೇಬಲ್/ಪೊಲೀಸ್ ಕಾನ್ಸ್ಟೇಬಲ್, 400 ಗೃಹರಕ್ಷಕ ಸಿಬ್ಬಂದಿ, 9 ಡಿಎಆರ್, 4 ಕೆಎಸ್ಆರ್ಪಿ ಹಾಗೂ 1 ಕ್ಯೂಆರ್ಟಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಕಾನೂನು ಸುವ್ಯವಸ್ಥೆಯ ಹಿತದೃಷ್ಟಿಯಿಂದ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಸಂಬಂಧಿಸಿದಂತೆ ಆಯೋಜಕರಿಗೆ ಅಗತ್ಯ ಮುಂಜಾಗ್ರತಾ ಕ್ರಮಗಳ ಕುರಿತು ಈಗಾಗಲೇ ಸೂಚನೆ ನೀಡಲಾಗಿದೆ. ಅನುಮತಿಗಳಿಗಾಗಿ ಸಿಂಗಲ್ ವಿಂಡೋ ವ್ಯವಸ್ಥೆ ಜಾರಿಗೊಳಿಸಲಾಗಿದೆ.
ಗಣೇಶ ವಿಸರ್ಜನಾ ಸ್ಥಳಗಳಲ್ಲಿ ಸ್ವಚ್ಛತೆ, ಲೈಟಿಂಗ್ ವ್ಯವಸ್ಥೆ ಹಾಗೂ ಸಿಸಿಟಿವಿ ಅಳವಡಿಕೆಗೆ ಸಂಬಂಧಿಸಿದ ಇಲಾಖೆಗಳೊಂದಿಗೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ, ಹಬ್ಬ ಪೂರ್ಣಗೊಳ್ಳುವವರೆಗೆ ಡಿಜೆ ಸೌಂಡ್ ಹಾಗೂ ಹೆಚ್ಚಿನ ಶಬ್ದ ಹೊರಸೂಸುವ ಸಾಧನಗಳ ಬಳಕೆಯನ್ನು ನಿಷೇಧಿಸಲಾಗಿದೆ.
ಗಣೇಶ ಮೂರ್ತಿಗಳ ಮೆರವಣಿಗೆ ನಡೆಯುವ ವಿವಿಧ ದಿನಾಂಕಗಳಲ್ಲಿ ಸಂಬಂಧಪಟ್ಟ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಕ್ಕೆ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯ ಎಲ್ಲಾ ಕಂದಾಯ ಅಧಿಕಾರಿಗಳು ಸ್ಥಳೀಯವಾಗಿ ಹಾಜರಿರುವಂತೆ ಸೂಚಿಸಲಾಗಿದೆ.
ಬ್ಯಾನರ್, ಬಂಟಿಂಗ್ಸ್, ಶಾಮಿಯಾನ ಹಾಗೂ ಪ್ರಿಂಟರ್ಸ್ ವ್ಯವಸ್ಥಾಪಕರೊಂದಿಗೆ ಸಭೆ ನಡೆಸಿ ಅಗತ್ಯ ಸಲಹೆ ಮತ್ತು ಸೂಚನೆಗಳನ್ನು ನೀಡಲಾಗಿದೆ. ಹಬ್ಬದ ಹಿನ್ನೆಲೆಯಲ್ಲಿ ವಿದ್ಯುತ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಕಾರವನ್ನೂ ಕೋರಲಾಗಿದೆ.
ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿಟಿವಿ, ವಾಚ್ ಟವರ್, ಪಿಎ ಸಿಸ್ಟಮ್ ಹಾಗೂ ಲೈಟಿಂಗ್ ವ್ಯವಸ್ಥೆ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ. ಸಾಮಾಜಿಕ ಜಾಲತಾಣಗಳ ಮೂಲಕ ತಪ್ಪು ಹಾಗೂ ಸುಳ್ಳು ಸಂದೇಶಗಳನ್ನು ಹರಡುವವರ ಮೇಲೂ ನಿಗಾ ಇರಿಸಲಾಗಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ.
ಹಬ್ಬದ ಸಂದರ್ಭದಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತದ ಸೂಚನೆಗಳನ್ನು ಪಾಲಿಸಿ ಶಾಂತಿ ಮತ್ತು ಸೌಹಾರ್ದತೆಯಿಂದ ಗೌರಿ-ಗಣೇಶ ಹಬ್ಬವನ್ನು ಆಚರಿಸುವಂತೆ ಮನವಿ ಮಾಡಲಾಗಿದೆ




