ಹಾವೇರಿ: ದಶಕಗಳಿಂದ ವಾಸವಿದ್ದರೂ ಮನೆಗಳ ಹಕ್ಕುಪತ್ರ ನೀಡಿಲ್ಲ ಎಂದು ಆರೋಪಿಸಿ ರಾಣೇಬೆನ್ನೂರು ತಾಲೂಕಿನ ಮಾಗೋಡು ಗ್ರಾಮದ ಬಳಿ ವಾಸವಿರುವ ನೂರಾರು ಕುಟುಂಬಗಳ ಸದಸ್ಯರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿ ಸರ್ಕಾರದ ಗಮನ ಸೆಳೆದರು.
ರೊಟ್ಟಿ ಬುತ್ತಿ ಕಟ್ಟಿಕೊಂಡು ಹಾವೇರಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ನೂರಾರು ಮಹಿಳೆಯರು ಹಾಗೂ ಬಡ ಕಾರ್ಮಿಕರು, ತಮ್ಮ ಮನೆಗಳಿಗೆ ಹಕ್ಕುಪತ್ರ ನೀಡುವಂತೆ ಆಗ್ರಹಿಸಿದರು.
ಮಾಗೋಡು ಗ್ರಾಮದ ಬಳಿ ನೂರಾರು ಕುಟುಂಬಗಳು ಸುಮಾರು 40 ವರ್ಷಗಳಿಂದ ವಾಸ ಮಾಡುತ್ತಿದ್ದರೂ ಇದುವರೆಗೆ ಮನೆಗಳ ಹಕ್ಕುಪತ್ರ ನೀಡಿಲ್ಲ ಎಂದು ಪ್ರತಿಭಟನಾಕಾರರು ಅಸಮಾಧಾನ ವ್ಯಕ್ತಪಡಿಸಿದರು.
ಸರ್ಕಾರ ‘ವಾಸಿಸುವವನೇ ಮನೆಯೊಡೆಯ’ ಎಂಬ ಯೋಜನೆ ಹಾಗೂ ಭೂ ಗ್ಯಾರಂಟಿ ಸೇರಿದಂತೆ ವಿವಿಧ ಭರವಸೆಗಳನ್ನು ನೀಡುತ್ತಿದೆ. ಆದರೆ, ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ವಾಸಿಸುತ್ತಿರುವ ನಮಗೆ ಮಾತ್ರ ಮನೆ ಹಕ್ಕುಪತ್ರ ನೀಡಲಾಗುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.
ತಾವು ಗೋಮಾಳದ ಜಾಗದಲ್ಲಿ ವಾಸವಿದ್ದೇವೆ ಎಂಬ ಕಾರಣ ಸೇರಿದಂತೆ ಹಲವು ಕಾರಣಗಳನ್ನು ನೀಡಿ ಹಕ್ಕುಪತ್ರ ನೀಡಲಾಗುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.
“ನಾವು ದಶಕಗಳಿಂದ ಇದೇ ಜಾಗದಲ್ಲಿ ವಾಸಿಸುತ್ತಿದ್ದೇವೆ. ನಮ್ಮ ಕುಟುಂಬಗಳಿಗೆ ಮನೆ ಹಕ್ಕುಪತ್ರ ನೀಡಬೇಕು. ಸರ್ಕಾರ ಬಡವರ ಪರವಾಗಿದ್ದರೆ ನಮಗೂ ನ್ಯಾಯ ಒದಗಿಸಬೇಕು” ಎಂದು ಆಗ್ರಹಿಸಿದರು.
ರೊಟ್ಟಿ ಬುತ್ತಿ ಕಟ್ಟಿಕೊಂಡು ಜಿಲ್ಲಾಧಿಕಾರಿ ಕಚೇರಿ ಎದುರು ಕುಳಿತು ಪ್ರತಿಭಟನೆ ನಡೆಸಲು ಆಗಮಿಸಿದ ಗ್ರಾಮಸ್ಥರು, ತಮ್ಮ ಬೇಡಿಕೆಯನ್ನು ಸರ್ಕಾರ ಹಾಗೂ ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿ ಶೀಘ್ರದಲ್ಲೇ ಮನೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿದರು.




