ಹಾವೇರಿ: ಕಬ್ಬಿಗೆ ಪ್ರತಿ ಟನ್ಗೆ ₹5,500 ದರ ನಿಗದಿ ಮಾಡುವವರೆಗೆ ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸಬಾರದು ಎಂದು ಆಗ್ರಹಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಹಾವೇರಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ನವೆಂಬರ್ 1ರೊಳಗೆ ಕಬ್ಬಿಗೆ ₹5,500 ದರ ನಿಗದಿ ಮಾಡಬೇಕು. ದರ ನಿಗದಿಯಾಗುವವರೆಗೆ ಹಾವೇರಿ ಜಿಲ್ಲೆಯಲ್ಲಿ ಕಬ್ಬು ನುರಿಸುವ ಯಾವುದೇ ಸಕ್ಕರೆ ಕಾರ್ಖಾನೆಯನ್ನು ಆರಂಭಿಸಬಾರದು ಎಂದು ರೈತ ಮುಖಂಡರು ಒತ್ತಾಯಿಸಿದರು.
ಹಾವೇರಿ ಜಿಲ್ಲೆಯಲ್ಲಿ ಬೆಳೆಯುವ ಕಬ್ಬನ್ನು ನುರಿಸುವ ಎಲ್ಲಾ ಸಕ್ಕರೆ ಕಾರ್ಖಾನೆಗಳಿಗೆ ತೆರಳಿ ಈಗಾಗಲೇ ಮನವಿ ಸಲ್ಲಿಸಲಾಗಿದೆ ಎಂದು ರೈತ ಸಂಘದ ಮುಖಂಡರು ತಿಳಿಸಿದರು. ಈ ಮನವಿಯನ್ನು ತಿರಸ್ಕರಿಸಿ ಯಾವುದೇ ಕಾರ್ಖಾನೆ ಕಾರ್ಯಾರಂಭಕ್ಕೆ ಮುಂದಾದರೆ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯ ಸಂದರ್ಭದಲ್ಲಿ ಯಾವುದೇ ಸಾವು-ನೋವು ಅಥವಾ ಅಹಿತಕರ ಘಟನೆಗಳು ಸಂಭವಿಸಿದರೆ ಅದಕ್ಕೆ ಸಂಬಂಧಿಸಿದ ಸಕ್ಕರೆ ಕಾರ್ಖಾನೆಗಳ ಮಾಲೀಕರೇ ನೇರ ಹೊಣೆಗಾರರು ಎಂದು ಸಂಘದ ಮುಖಂಡರು ಮನವಿಯಲ್ಲಿ ತಿಳಿಸಿದ್ದಾರೆ.
ಕಬ್ಬು ಬೆಳೆಗಾರರ ಹಿತದೃಷ್ಟಿಯಿಂದ ಸೂಕ್ತ ದರ ನಿಗದಿ ಮಾಡುವಂತೆ ಹಾಗೂ ರೈತರ ಬೇಡಿಕೆಯನ್ನು ಪರಿಗಣಿಸಿ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ರಾಜ್ಯ ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಭುವನೇಶ್ವರ ಶಿಡ್ಲಾಪುರ, ಜಯಣ್ಣ ಮಾಗಡಿ, ರವಿಕುಮಾರ್ ಸವಣೂರು, ನಾಗನಗೌಡ, ರಾಮನಗೌಡ್ರು, ಪ್ರಭಣ್ಣ ಗೌರಿಮನಿ, ಬಂಗಾರಯ್ಯ ಕಿತ್ತೂರುಮಠ, ಫಕ್ಕಿರೆಡ್ಡಿ ಮರೋಳ, ಎಂ.ಎಂ. ಅಂಗಡಿ, ಬಸವರಾಜ ಗ್ವಾಳಪ್ಪನವರ್, ಶಂಬಣ್ಣ ದೊಡ್ಮನಿ, ಮುರಿಗೆಪ್ಪ ಶೆಟ್ಟರ್, ರಾಜಣ್ಣ ಕಲ್ಲೇದೇವರು ಸೇರಿದಂತೆ ಹಲವು ರೈತ ಮುಖಂಡರು ಉಪಸ್ಥಿತರಿದ್ದರು.




