ಉತ್ತರ ಕನ್ನಡ ಜಿಲ್ಲೆಯಲ್ಲಿರುವ ಅಪಾಯಕಾರಿ ಸ್ಥಳಗಳನ್ನು ಗುರುತಿಸಿ ಎರಡು ದಿನದಲ್ಲಿ ವರದಿ ಸಲ್ಲಿಸುವಂತೆ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ಅಧೀನ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು `ಜಿಲ್ಲೆಯಲ್ಲಿ ಅಪಾಯಕಾರಿಯಾಗಿರುವ ಶಾಲೆಗಳು ಅಂಗನವಾಡಿಗಳು, ಜನವಸತಿ ಪ್ರದೇಶಗಳ ಸಂಪೂರ್ಣ ವಿವರಗಳನ್ನು ಸಂಗ್ರಹಿಸಿ ಅಲ್ಲಿ ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕ ಕ್ರಮಗಳನ್ನು ಕೈಗೊಂಡು ಎರಡು ದಿನದಲ್ಲಿ ವರದಿ ನೀಡಬೇಕು’ ಎಂದು ಸೂಚಿಸಿದರು. ಶಾಲೆಗಳು ಮತ್ತು ಅಂಗನವಾಡಿಗಳ ಸಮೀಪ ಅಪಾಯಕಾರಿ ಮರಗಳು, ವಿದ್ಯುತ್ ಕಂಬಗಳು, ಶಿಥಿಲವಾದ ಕಾಂಪೌAಡ್ ಗೋಡೆ, ಶಾಲಾ ಕಟ್ಟಡ ಹಾಗೂ ಗುಡ್ಡ ಕುಸಿತ ಸಂಭವಿಸುವ ಪ್ರದೇಶಗಳ ಬಳಿಯಲ್ಲಿ ವಾಸ ಮಾಡುತ್ತಿರುವ ಸಾರ್ವಜನಿಕರ ಸಂಪೂರ್ಣ ವಿವರಗಳನ್ನು ಸಂಗ್ರಹಿಸಿ ಆ ಪ್ರದೇಶದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಜರುಗಿಸಬೇಕು’ ಎಂದು ಸೂಚಿಸಿದರು.
ಅಪಾಯಕಾರಿ ಪ್ರದೇಶಗಳಲ್ಲಿ ವಾಸಿಸುತ್ತಿರುವ ಸಾರ್ವಜನಿಕರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಮತ್ತು ಕಾಳಜಿ ಕೇಂದ್ರಗಳಿಗೆ ತೆರಳುವಂತೆ ಲಿಖಿತವಾಗಿ ಸೂಚನೆಗಳನ್ನು ನೀಡಿ, ಅವರಿಂದ ಸಹಿ ಪಡೆಯುವಂತೆ ತಿಳಿಸಿದರು. ಎಲ್ಲಾ ಗ್ರಾಮಗಳ ಪ್ರತಿಯೊಂದು ಮನೆಗಳನ್ನು ಸರ್ವೆ ಮಾಡುವಂತೆ ಹಾಗೂ ಎರಡು ದಿನಗಳಲ್ಲಿ ದೃಢೀಕೃತ ವರದಿ ನೀಡುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು .
ಜಿಲ್ಲೆಯ ಯಾವುದೇ ಅಧಿಕಾರಿಗಳು ಕೇಂದ್ರ ಬಿಟ್ಟು ತೆರಳದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿಗಳು, ಜಿಲ್ಲೆಯ ಎಲ್ಲಾ ತಹಸೀಲ್ದಾರ್ ಗಳು ಮತ್ತು ಉಪ ವಿಭಾಗಾಧಿಕಾರಿಗಳ ವಾಹನಗಳಿಗೆ ತುರ್ತು ಸಂಪರ್ಕಗಾಗಿ ವಯರ್ಲೆಸ್ ಸಾಧನಗಳನ್ನು ಅಳವಡಿಸುವಂತೆ ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಶಾಲಾ ಮಕ್ಕಳಿಗೆ ಪ್ರಾಕೃತಿಕ ವಿಕೋಪಗಳ ನಿರ್ವಹಣೆ ಕುರಿತಂತೆ ಸೂಕ್ತ ಅರಿವು ಮೂಡಿಸುವಂತೆ ಮತ್ತು ಇಂತಹ ಸಮಯದಲ್ಲಿ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು, ತಮ್ಮ ಅಗತ್ಯ ವಸ್ತುಗಳನ್ನು, ದಾಖಲೆಗಳನ್ನು ಸಂರಕ್ಷಿಸಿಕೊಳ್ಳುವ ವಿಧಾನಗಳ, ಆರೋಗ್ಯದ ಬಗ್ಗೆ ಕಾಳಜಿ ವಹಿಸುವ ಕುರಿತು ಮಾಹಿತಿ ಶಿಕ್ಷಣ ನೀಡುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ತಮಗೆ ವಹಿಸಲದ ಕರ್ತವ್ಯದಲ್ಲಿ ನಿರ್ಲಕ್ಷö್ಯ ತೋರುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ವಿರುದ್ದ ವಿಕೋಪ ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.





Discussion about this post