ಉತ್ತರ ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದ್ದ ಕಸ್ತೂರಿ ರಂಗನ್ ವರದಿ ಜಾರಿಗೆ ಸಮ್ಮತಿ ದೊರೆತಿದೆ.
ಉತ್ತರ ಕನ್ನಡ ಜಿಲ್ಲೆ ಸೇರಿದಂತೆ 11 ಜಿಲ್ಲೆಗಳ ಜನಪ್ರತಿನಿಧಿಗಳ ಸಭೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ನೇತೃತ್ವದಲ್ಲಿ ನಡೆದಿದ್ದು, ಈ ಸಭೆಯಲ್ಲಿ ಕೆಲ ನಿಬಂಧನೆಗಳನ್ನ ಹಾಕುವ ಮೂಲಕ ಸಮ್ಮತಿ ನೀಡಲಾಗಿದೆ. ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಕುರಿತಂತೆ ಕೇಂದ್ರ ಸರ್ಕಾರ ಆ 2ರಂದು 6ನೇ ಅಧಿಸೂಚನೆ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ನಿಲುವು ಸಲ್ಲಿಸಬೇಕಿದ್ದು, 11 ಜಿಲ್ಲೆಗಳ ಜನಪ್ರತಿನಿಧಿಗಳ ಸಭೆ ನಡೆದಿದೆ.
`ಕರ್ನಾಟಕದ ವಿವಿಧ ಅರಣ್ಯ ಮತ್ತು ವನ್ಯಜೀವಿ ತಾಣಗಳ ಸುತ್ತ 16,114 ಚದರ ಕಿ.ಮೀ ಪರಿಸರ ಸೂಕ್ಷ್ಮ ಪ್ರದೇಶವನ್ನು ಈಗಾಗಲೇ ಸಂರಕ್ಷಿಸಲಾಗಿದ್ದು, ಈ ಮಿತಿಗೆ ಒಳಪಟ್ಟು ಕಸ್ತೂರಿ ರಂಗನ್ ವರದಿಯನ್ನು ಸಮ್ಮತಿಸಬಹುದು’ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. `ಕಸ್ತೂರಿ ರಂಗನ್ ಸಮಿತಿ ವರದಿಯಲ್ಲಿ ರಾಜ್ಯದಲ್ಲಿ 20,668 ಚದರ ಕಿ.ಮೀ ಪರಿಸರ ಸೂಕ್ಷ್ಮ ವಲಯ ಗುರುತಿಸಲಾಗಿದೆ. ಈ ಬಗ್ಗೆ ಭೌತಿಕ ಸರ್ವೇ ನಡೆಸಿದರೆ ಈ ಪ್ರದೇಶ ಇನ್ನೂ ಹೆಚ್ಚಳವಾಗಲಿದೆ ಎಂಬ ಅಭಿಪ್ರಾಯವನ್ನ ಜನಪ್ರತಿನಿಧಿಗಳು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪರಿಶೀಲಿಸಲಾಗುವುದು’ ಎಂದು ತಿಳಿಸಿದ್ದಾರೆ.
`ಹಲವು ತಲೆಮಾರುಗಳಿಂದ ಅರಣ್ಯ ಪ್ರದೇಶದಲ್ಲೇ ಜೀವನ ನಡೆಸುತ್ತಿರುವವರನ್ನು ಒಕ್ಕಲೆಬ್ಬಿಸುವುದು ಸೂಕ್ತವಲ್ಲ. ಅವರಿಗೆ ಬೇರೆ ಕಡೆ ಪುನರ್ವಸತಿ ಕಲ್ಪಿಸಿದರೂ ಅವರು ಅಲ್ಲಿಗೆ ಹೋಗುವುದಿಲ್ಲ ಎಂಬ ಅಭಿಪ್ರಾಯವೂ ಸಭೆಯಲ್ಲಿ ವ್ಯಕ್ತವಾಗಿದ್ದು, ಹೀಗಾಗಿ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಎಲ್ಲ ವಿಚಾರಗಳ ಬಗ್ಗೆ ಚಿಂತನ ಮಂಥನ ನಡೆಸಲಾಗುವುದು’ ಎಂದಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ 704 ಹಳ್ಳಿಗಳು
ಕಸ್ತೂರಿ ರಂಗನ್ ವರದಿಯಲ್ಲಿ ಜಿಲ್ಲೆಯ 6998 ಚ.ಕಿ.ಮೀ ಪ್ರದೇಶದಲ್ಲಿನ 9 ತಾಲೂಕುಗಳ 704 ಹಳ್ಳಿಗಳು ಪರಿಸರ ಸೂಕ್ಷ್ಮ ಪ್ರದೇಶ ವ್ಯಾಪ್ತಿಯಲ್ಲಿ ಸೇರ್ಪಡೆಯಾಗಿದ್ದು, ಈ ಬಗ್ಗೆ ಜಿಲ್ಲೆಯ ಜನಪ್ರತಿನಿಧಿಗಳು ಸರ್ಕಾರದ ಮುಂದೆ ಜಿಲ್ಲೆಯಲ್ಲಿ ಜನರು ಎದುರಿಸಬೇಕಾದ ಸಮಸ್ಯೆಗಳ ಬಗ್ಗೆ ತಿಳಿಸಿದ್ದಾರೆ.




