ಕಾರವಾರ: ಮಂಡ್ಯ ಜಿಲ್ಲೆಯಲ್ಲಿ ಡಿಸೆಂಬರ್ 20ರಿಂದ 22ರವರೆಗೆ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ರಾಜ್ಯಾದ್ಯಂತ ಸಂಚರಿಸುವ ಕನ್ನಡ ಜ್ಯೋತಿ ರಥಯಾತ್ರೆಯನ್ನು ಜಿಲ್ಲಾ ಕೇಂದ್ರ ಕಾರವಾರದಲ್ಲಿ ಸೋಮವಾರ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸ್ವಾಗತಿಸಿ ಪೂಜೆ ಸಲ್ಲಿಸಿ ಬರಮಾಡಿಕೊಳ್ಳಲಾಯಿತು.
ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದ ಸಹಾಯಕ ಆಯುಕ್ತ ಕನಿಷ್ಕ `ಕನ್ನಡ ಕೇವಲ ಭಾಷೆಯಲ್ಲ ತನ್ನದೇ ಆದ ನೆಲ, ಜಲ, ಸಂಸ್ಕೃತಿಯ ಹಿರಿಮೆಯನ್ನು ಒಳಗೊಂಡಿದೆ’ ಎಂದರು. ಕ.ಸಾ.ಪ ಜಿಲ್ಲಾ ಅಧ್ಯಕ್ಷ ಬಿ.ಎನ್ ವಾಸರೆ ಮಾತನಾಡಿ `ಸಕ್ಕರೆ ನಾಡು ಮಂಡ್ಯದಲ್ಲಿ ಡಿ 20ರಿಂದ 22ರವರೆಗೆ ನಡೆಯುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಜ್ಯೋತಿ ರಥವು 87 ದಿನಗಳ ಕಾಲ ರಾಜ್ಯದ 240 ತಾಲೂಕುಗಳಲ್ಲಿ ಸಂಚರಿಸಲಿದೆ’ ಎಂದರು.
ಈ ಕಾರ್ಯಕ್ರಮದಲ್ಲಿ ಕ.ಸಾ.ಪ ತಾಲೂಕು ಅಧ್ಯಕ್ಷ ರಾಮ ನಾಯ್ಕ ತಹಶೀಲ್ದಾರ ನಿಶ್ಚಲ್ ನರೋನಾ, ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಮಂಗಲಾ ಎಂ, ಕ.ಸಾ.ಪ ಪದಾಧಿಕಾರಿಗಳು ಇದ್ದರು.
ನ್ಯಾಯಾಲಯದಲ್ಲಿದೆ ಹಲವು ಉದ್ಯೋಗ
ಕಾರವಾರ: ಕಾನೂನು ನೆರವು ರಕ್ಷಣಾ ಸಲಹೆಗಾರರ ವ್ಯವಸ್ಥೆಯಲ್ಲಿ ಕೆಲಸ ಮಾಡಲು ವಿವಿಧ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ.
ಉಪ ಮುಖ್ಯ ಕಾನೂನು ನೆರವು ಸಲಹೆಗಾರರಾಗಿ 2 ಹುದ್ದೆ ಹಾಗೂ ಸಹಾಯಕ ಕಾನೂನು ನೆರವು ಸಲಹೆಗಾರರು 5 ಹುದ್ದೆಗಳಿಗೆ ಕಾರ್ಯನಿರ್ವಹಿಸಲು ಅರ್ಹ ನ್ಯಾಯವಾದಿಗಳ ಹುಡುಕಾಟ ನಡೆದಿದೆ. ಜೊತೆಗೆ ಕಚೇರಿಯಲ್ಲಿ ಕಾರ್ಯನಿರ್ವಹಿಸಲು ಕಛೇರಿ ಸಹಾಯಕ ಅಥವಾ ಗುಮಾಸ್ತ 2 ಹುದ್ದೆಗೆ ಹುಡುಕಾಟ ನಡೆದಿದೆ. ಇದರೊಂದಿಗೆ ದಲಾಯತ್ 2 ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಭರ್ತಿಮಾಡಿದ ಅರ್ಜಿಗಳನ್ನು ಅಕ್ಟೋಬರ್ 3ರೊಳಗಾಗಿ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರವಾರ,” ಜಿಲ್ಲಾ ನ್ಯಾಯಾಲಯದ ಆವರಣಕ್ಕೆ ಸಲ್ಲಿಸಬಹುದು.
ಬ್ಯೂಟಿ ಪಾರ್ಲರ್ ತೆರೆಯುವವರಿಗೆ ತರಬೇತಿ ಶಿಬಿರ
ಕಾರವಾರ: ಕೆನರಾ ಬ್ಯಾಂಕ್ ಮತ್ತು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ ಬ್ಯೂಟಿ ಪಾರ್ಲರ್ ಕುರಿತ 30 ದಿನಗಳ ಉಚಿತ ತರಬೇತಿಯು ನವೆಂಬರ್ 5 ರಿಂದ ಪ್ರಾರಂಭವಾಗಲಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನ್ನು ಕಡ್ಡಾಯವಾಗಿ ಹೊಂದಿರುವ ಗ್ರಾಮೀಣ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 18 ಕೊನೆಯ ದಿನವಾಗಿದೆ.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042, 9740982585, 9113880324 ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಿಗಡಿ ಕೃಷಿ ಮಾಡುವವರಿಗೆ ನೊಂದಣಿ ಕಡ್ಡಾಯ
ಕಾರವಾರ: ಜಿಲ್ಲೆಯಲ್ಲಿ ಒಟ್ಟು 128 ಕರಾವಳಿ ಜಲಕೃಷಿ ಪ್ರಾಧಿಕಾರದಿಂದ ನೋಂದಾಯಿತ ಸೀಗಡಿ ಮೀನು ಕೃಷಿಕರಿದ್ದು, 31 ಕೃಷಿಕರು ಮಾತ್ರ ಸಿಗಡಿ ಕೃಷಿ ಕೊಳದ ನೋಂದಣಿ ನವೀಕರಿಸಿದ್ದಾರೆ. ಉಳಿದವರು ಡಿಸೆಂಬರ್ 15 ರೊಳಗೆ ನೋಂದಣಿಯನ್ನು ನವೀಕರಿಸಲು ಮೀನುಗಾರಿಕಾ ಇಲಾಖೆ ಸೂಚಿಸಿದೆ.




